
ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂಭಾಗ ಇಂದು (ಏ.30) ಮಧ್ಯಾಹ್ನ ನಡೆದಿದೆ.
ಜೆಡಿಎಸ್ ಪಕ್ಷ ಖಾಸಗಿ ಹೋಟೆಲ್ನಲ್ಲಿ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಪ್ರಮುಖರು ಮತ್ತು ಕೋರ್ ಕಮಿಟಿ ಸದಸ್ಯರ ಸಭೆ ಕರೆದಿತ್ತು. ಸಭೆ ಮುಗಿಸಿ ಕುಮಾರಸ್ವಾಮಿ ಹೊರ ಬರುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಕುಮಾರಸ್ವಾಮಿ ಕಾಂಗ್ರೆಸ್ ಕಾರ್ಯಕರ್ತರತ್ತ ಆಗಮಿಸಿದ್ದು, ಮುಖಂಡರು ಅವರನ್ನು ತಡೆದಿದ್ದಾರೆ. ನಂತರ ಸಭೆಯಲ್ಲಿದ್ದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹೊರ ಬರುತ್ತಿದ್ದಂತೆ ತೀವ್ರ ವಾಗ್ವಾದ ನಡೆದಿದೆ


ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿದ್ದರು. ಜೆಡಿಎಸ್ ಮುಖಂಡರಾದ ಸಾ.ರಾ ಮಹೇಶ್, ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರತ್ತ ಮುನ್ನುಗಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹರಸಾಹಸಪಟ್ಟು ಎರಡೂ ಕಡೆಯವರನ್ನು ತಡೆದಿದ್ದಾರೆ. ಬಳಿಕ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.

