
ಬೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಆರೋಪಿಗಳು’
ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ ಮಾಡಿ ಆತಂಕವುಂಟುಮಾಡಲು ಯತ್ನಿಸುತ್ತಿದ್ದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ತಾಲೂಕಿನ ಪೊಳಲಿ ಸಮೀಪದ ಬಡಗಬೆಳ್ಳೂರು ಗ್ರಾಮದಲ್ಲಿ ಎಂಬಲ್ಲಿ ನಡೆದಿದೆ.

ಆರೋಪಿಗಳನ್ನು ಬೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಎಂದು ಗುರುತಿಸಲಾಗಿದೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ತೆರಳಿದಾಗ, ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು ಮಾಡುತ್ತಿರುವುದು ಕಂಡುಬಂದಿದೆ.

ಇಲಾಖಾ ವಾಹನ ಸ್ಥಳಕ್ಕೆ ಬರುವುದನ್ನು ಕಂಡ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಕೆ.ಎ 70 – 3479 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಒಂದು ತಲವಾರು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
