ತೈಲ ದರ ಏರಿಕೆ ವಾಪಸ್ ಪಡೆಯಲು ಆಗ್ರಹ
ಬೆಂಗಳೂರು: ಡೀಸೆಲ್- ಪೆಟ್ರೋಲ್ ದರ (Petrol-Diesel Price) ಏರಿಕೆ ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ಗುರುವಾರ ಎರಡನೇ ಹಂತದ ಹೋರಾಟ ನಡೆಸಲಾಗುವುದು ಎಂದು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡಿದ್ದೇವೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ರಸ್ತೆತಡೆ ಆಂದೋಲನ ನಡೆಸಲಿದ್ದೇವೆ ಎಂದು ವಿವರಿಸಿದರು.

ವಿಪರೀತ ತೆರಿಗೆ ಶುಲ್ಕ ಹೆಚ್ಚಳದ ಅಭಿಯಾನವನ್ನೇ ರಾಜ್ಯ ಸರ್ಕಾರ ನಡೆಸುತ್ತಿದೆ. ಹಲವಾರು ಕ್ಷೇತ್ರಗಳ ತೆರಿಗೆಯನ್ನು ಈ ಸರ್ಕಾರ ಹೆಚ್ಚಿಸಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ (Congress) ಸರ್ಕಾರವು ಕರ್ನಾಟಕದ ಜನರ ಜೀವನವನ್ನೇ ಕಷ್ಟದಾಯಕವನ್ನಾಗಿ ಮಾಡಿದೆ ಎಂದು ಟೀಕಿಸಿದರು. ಜನರ ಬದುಕನ್ನೇ ದುಸ್ತರವನ್ನಾಗಿ ಮಾಡಿದ ಜನವಿರೋಧಿ ಸರ್ಕಾರ ಇದು. ರೈತವಿರೋಧಿ, ಎಸ್ಸಿ, ಎಸ್ಟಿ, ಒಬಿಸಿಗಳ ವಿರೋಧಿ ಸರ್ಕಾರ ಇದಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದ ಈ ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ವಿವಿಧ ತೆರಿಗೆ ಏರಿಕೆ:
ಆಸ್ತಿ ತೆರಿಗೆಯನ್ನು 20% ರಿಂದ 120% ವರೆಗೆ ಹೆಚ್ಚಿಸಿದ್ದಾರೆ. ಮೋಟಾರು ವಾಹನ ತೆರಿಗೆಯನ್ನು 40% ರಿಂದ 80% ರಷ್ಟು ಹೆಚ್ಚಿಸಿದ್ದಾರೆ. ಅಬಕಾರಿ ತೆರಿಗೆ (ಮದ್ಯ) 20% ರಿಂದ 400% ವರೆಗೆ ಹೆಚ್ಚಳವಾಗಿದೆ. ಹೆಣ್ಮಕ್ಕಳಿಗೆ ಬಸ್ ಪ್ರಯಾಣದರ ಉಚಿತ ಎನ್ನುತ್ತಿದ್ದರು. ಗಂಡಸರ ಬಸ್ ಪ್ರಯಾಣದರ ಏರಿಸಿದ್ದಾರೆ. ವಿದ್ಯುತ್ ದರವನ್ನೂ ಹೆಚ್ಚಿಸಿದ್ದಾರೆ. ಇದರಿಂದ ಕೈಗಾರಿಕಾ ಉತ್ಪನ್ನಗಳ ದರ ಏರಿದೆ. ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿದ್ದಾರೆ. ಪ್ರತಿ ಲೀಟರ್ ಹಾಲಿನ ದರ ಏರಿಸಿದ್ದಾರೆ. ಇದರಿಂದ ಹಾಲು, ಮೊಸರು, ತುಪ್ಪ ಮತ್ತಿತರ ಉತ್ಪನ್ನಗಳ ದರ ಏರಿದೆ ಎಂದು ತಿಳಿಸಿದರು
