ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೊಟ್ಯಂತರ ರೂ. ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ವಿಜಯೇಂದ್ರ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಹಿನ್ನೆಲೆ ಲೋಕಾಯುಕ್ತ ತನಿಖಾಧಿಕಾರಿಗಳು ಕೋರ್ಟ್ಗೆ ಹಾಜರಾಗಿದ್ದು ಶೋಕಾಸ್ ನೋಟಿಸ್ಗೆ ವಿವರಣೆ ಸಲ್ಲಿಸಿದ್ದಾರೆ.

ಬೆಂಗಳೂರು, ಆಗಸ್ಟ್ 08: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಲೋಕಾಯುಕ್ತ ತನಿಖಾಧಿಕಾರಿ ಹಾಜರಾಗಿದ್ದು, ಕೋರ್ಟ್ ನೀಡಿದ್ದ ಶೋಕಾಸ್ ನೋಟಿಸ್ಗೆ ವಿವರಣೆ ಸಲ್ಲಿಸಿದ್ದಾರೆ. ಈ ವೇಳೆ ಸರಿಯಾದ ತನಿಖಾ ಪ್ರಗತಿ ವಿವರವನ್ನು ಸಲ್ಲಿಸದ್ದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ.

2 ವರ್ಷಗಳಾದರೂ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿ ಬಾರಿಯೂ ಶೆಲ್ ಕಂಪನಿಗಳ ಬಗ್ಗೆ ತನಿಖೆ ನಡೆಸಿರುವುದಾಗಿ ಮಾತ್ರವೇ ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಡಿವೈಎಸ್ಪಿ ಸತೀಶ್ ಎಂಹೆಚ್ ವರ್ತನೆ ಬಗ್ಗೆ ಕೋರ್ಟ್ ಆಕ್ಷೇಪಿಸಿದೆ.

ಲೋಕಾಯುಕ್ತ ಎಸ್ಪಿ, ತನಿಖಾಧಿಕಾರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಬಿಡಿಎ ಅಪಾರ್ಟ್ಮೆಂಟ್ ಟೆಂಡರ್ನಲ್ಲಿ ಸುಮಾರು 8 ಕೋಟಿ 41 ಲಕ್ಷ ರೂ. ಹಣ ನಕಲಿ ಕಂಪನಿಗಳಿಗೆ ವರ್ಗಾವಣೆ ಮಾಡುವ ಮೂಲಕ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ವರ್ಗಾವಣೆ ಆರೋಪ ಕೇಳಿಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು.

ಘಟನೆ ಹಿನ್ನೆಲೆ
ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೊಟ್ಯಂತರ ರೂ. ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ 2022ರ ಸೆಪ್ಟೆಂಬರ್ನಲ್ಲಿ ಆದೇಶ ನೀಡಿತ್ತು.