ತುಮಕೂರು(ಜ.10): ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.

ತ್ರಿಶಾಲ್ (13), ಮೃತ ದುರ್ದೈವಿ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿರುವ ವಿಶಾಲ್ ಸರ್ವೋದಯ ಸ್ಕೂಲ್ನಲ್ಲಿ 7ನೇ ತರಗತಿ ಓದುತ್ತಿದ್ದ. ತಾಯಿ ಶಕುಂತಲಾ ಜೊತೆ ವಿಜಯನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ಪತ್ತೆ:
ಮೃತ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿಸಲಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
