ಡೆಹ್ರಾಡೂನ್: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡ (Uttarakhand) ಸರ್ಕಾರ ʼಆಪರೇಷನ್ ಕಾಲನೇಮಿʼ (Operation Kalanemi) ಕಾರ್ಯಾಚರಣೆ ಆರಂಭಿಸಿದ್ದು, 82 ನಕಲಿ ಬಾಬಾಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಒಟ್ಟು 82 ಮಂದಿ ನಕಲಿ ಬಾಬಾಗಳನ್ನು ಬಂಧಿಸಲಾಗಿದೆ. ಭಾನುವಾರ ಬಂಧಿಸಿದ 34 ಜನರ ಪೈಕಿ 23 ಮಂದಿ ಇತರ ರಾಜ್ಯಗಳ ನಿವಾಸಿಗಳಾಗಿದ್ದಾರೆ.
ಬಂಧಿತ ನಕಲಿ ಬಾಬಾಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಜನರ ಭಾವನೆಗಳ ಜೊತೆ ಆಟವಾಡುವ ಇಂತಹ ವಂಚಕರನ್ನು ಸೆರೆಹಿಡಿಯಲು ತಂಡವನ್ನು ರಚಿಸಲಾಗಿದ್ದು, ನಕಲಿ ಬಾಬಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಎಸ್ಪಿ ಅಜಯ್ ಸಿಂಗ್ ತಿಳಿಸಿದ್ದಾರೆ.