ಚಾಮರಾಜನಗರದ ಗಾಳಿಪುರ ಬೈಪಾಸ್ನಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಒಬ್ಬ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸದ್ಯ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಾಮರಾಜನಗರ, ಸೆಪ್ಟೆಂಬರ್ 07: ಚಾಮರಾಜನಗರದ ಗಾಳಿಪುರ ಬೈಪಾಸ್ನಲ್ಲಿ ಶನಿವಾರ ಸಂಭವಿಸಿದ ಲಾರಿ, ಕಾರು ಮತ್ತು ದ್ವಿಚಕ್ರ ವಾಹನ ನಡುವಿನ ಸರಣಿ ಅಪಘಾತದಲ್ಲಿ (serial accident) ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮೆರಾನ್, ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಮೃತರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ. ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಮೃತಪಟ್ಟಿದ್ದಾರೆ
ಒಟ್ಟು ನಾಲ್ವರು ಟಿವಿಎಸ್ ಎಕ್ಸ್ ಎಲ್ ಬೈಕ್ ತೆಗೆದುಕೊಂಡು ಗಾಳಿಪುರದ ಬಳಿ ಇರುವ ಔಟರ್ ರಿಂಗ್ ರಸ್ತೆಗೆ ಬಂದಿದ್ದು, ಹೈವೆಯಲ್ಲಿ ವೇಗವಾಗಿ ಬರ್ತಾಯಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರು. ಬೈಕ್ ಹಿಂದೆಯೇ ಇದ್ದ ಕಾರು ಕೂಡ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ನಾಲ್ವರು ಸಹ ಹೆಲ್ಮೆಟ್ ಹಾಕಿರ್ಲಿಲ್ಲ, ಪರಿಣಾಮ ನಾಲ್ವರಿಗೂ ಹೆಡ್ ಇಂಜ್ಯುರಿಯಾಗಿ ಮೃತಪಟ್ಟಿದ್ದಾರೆ.
ಅದೇನೆ ಹೇಳಿ ಅಪ್ರಾಪ್ತರ ಕೈಗೆ ಬೈಕ್ ನೀಡಿದ್ದು ಪೋಷಕರ ತಪ್ಪು. ಇತ್ತ ಒಂದೇ ಬೈಕ್ನಲ್ಲಿ ಹುಡುಗಾಟ ಆಡಲು ಹೋಗಿ ಈಗ ನಾಲ್ಕು ಜೀವಗಳು ಬಲಿಯಾಗಿದ್ದು ಮಾತ್ರ ದುರಂತವೇ ಸರಿ.