

India vs Pakistan: ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
T20 World Cup 2022: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ (India vs Pakistan) ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾಗೆ (Team India) ವಿರಾಟ್ ಕೊಹ್ಲಿ (Virat Kohli) ಭರ್ಜರಿ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಮೂಲಕ ಭಾರತೀಯರ ದೀಪಾವಳಿ ಸಂಭ್ರಮವನ್ನು ಹೆಚ್ಚಿಸಿದ್ದರು. ಆದರೆ ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿಯನ್ನು ಕಿಚಾಯಿಸುವ ಮೂಲಕ ಪ್ರಮುಖ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ, ಪಂದ್ಯ ಗೆಲ್ಲಿಸಿದಕ್ಕಾಗಿ ವಿರಾಟ್ ಕೊಹ್ಲಿಯವರಿಗೆ ಅಭಿನಂದನೆಗಳು. ಆದರೆ ಈ ಗೆಲುವನ್ನು ಸಂಭ್ರಮಿಸುವುದು ಹೇಗೆ? ಏಕೆಂದರೆ ಪಟಾಕಿ ರಹಿತ ದೀಪಾವಳಿ ಆಚರಿಸಲು ನೀವು ಸಲಹೆ ನೀಡಿದ್ದೀರಿ ಎಂದು ಕಿಚಾಯಿಸಿದ್ದಾರೆ.
ಅಂದರೆ ಈ ಹಿಂದೆ ವಿರಾಟ್ ಕೊಹ್ಲಿ ಯಾವುದೇ ಪಟಾಕಿ ಸಿಡಿಸದೇ ಅರ್ಥಪೂರ್ಣವಾಗಿ ದೀಪಾವಳಿ ಆಚರಿಸಿ ಎಂದು ಮನವಿ ಮಾಡಿದ್ದರು. ಅಲ್ಲದೆ ಮಾಲಿನ್ಯ ಮುಕ್ತ ದೀಪಾವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದನ್ನೇ ಪರೋಕ್ಷವಾಗಿ ಪ್ರಸ್ತಾಪಿಸುವ ಮೂಲಕ ದೀಪಾವಳಿ ಸಂದರ್ಭದಲ್ಲಿ ಈ ಗೆಲುವನ್ನು ಹೇಗೆ ಸಂಭ್ರಮಿಸಬೇಕೆಂದು ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಅವರ ಈ ಟ್ವೀಟ್ಗೆ ವಿರಾಟ್ ಕೊಹ್ಲಿಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಪ್ರತಿಕ್ರಿಯಿಸಿದ್ದಾರೆ.
ದಯವಿಟ್ಟು, ಈಗ ಇದೆಲ್ಲಾ ಬೇಡ. ಇಂತಹ ವಿಷಯಗಳನ್ನು ಇದನ್ನೆಲ್ಲಾ ಬದಿಗಿಟ್ಟು, ಪಾಕಿಸ್ತಾನದ ವಿರುದ್ಧದ ಭಾರತದ ಐತಿಹಾಸಿಕ ಗೆಲುವನ್ನು ಸಂಭ್ರಮಿಸೋಣ ಎಂದು ದೊಡ್ಡ ಗಣೇಶ್ ಪ್ರತಿಕ್ರಿಯಿಸಿದ್ದಾರೆ. ಇತ್ತ ಕರ್ನಾಟಕದ ಮಾಜಿ ಆಟಗಾರನ ಪ್ರತ್ಯುತ್ತರಕ್ಕೂ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಸದ್ಯ ಚಕ್ರವರ್ತಿ ಸೂಲಿಬೆಲೆ ಅವರ ಟ್ವೀಟ್ ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದೆ.