
ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 2-3 ಸ್ಥಾನ ಅಲ್ಪಸಂಖ್ಯಾತರಿಗೆ (Minorities) ನೀಡಬೇಕು ಎಂದು ಅಲ್ಪಸಂಖ್ಯಾತ ಮುಖಂಡರು ಕರ್ನಾಟಕ ಕಾಂಗ್ರೆಸ್ಗೆ (Karnataka Congress) ಬೇಡಿಕೆ ಇಟ್ಟಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ (KPCC Office) ಅಲ್ಪಸಂಖ್ಯಾತ ಶಾಸಕರು, ಮುಖಂಡರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಇಂದು ಸಭೆ ನಡೆಯಿತು.

ಲೋಕಸಭೆ ಚುನಾವಣೆ ಮತ್ತು ಮುಂದಿನ ದಿನಗಳಲ್ಲಿ ಬರುವ ಬಿಬಿಎಂಪಿ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಸಮಯದಾಯದ ಸಂಘಟನೆ ಕುರಿತಂತೆ ಸಮಾಲೋಚನೆ ನಡೆಯಿತು. ಈ ಚುನಾವಣೆಯಲ್ಲಿ 95% ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಚಲಾಯಿಸಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 2-3 ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಸಭೆಯ ಬಳಿಕ ಡಿಕೆ ಶಿವಕುಮಾರ್ ಮಾತನಾಡಿ, ಲೋಕಸಭೆ ಚುನಾವಣೆ, ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಕೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರ ಸ್ಥಾನಗಳನ್ನ ಕಸಿದುಕೊಂಡಿದ್ದರು. ಅಲ್ಪಸಂಖ್ಯಾತರು ಹೆಚ್ಚು ಇರುವ ಕಡೆಯೂ ಅವಕಾಶ ಕೊಟ್ಟಿರಲಿಲ್ಲ. ಜನಸಂಖ್ಯೆ ಆಧಾರದಲ್ಲಿ ಸ್ಥಾನ ಕೊಡಬೇಕು ಅಂತ ಮುಖಂಡರು ಕೇಳಿದ್ದಾರೆ ಎಂದು ತಿಳಿಸಿದರು.

ಮುಖಂಡರು ಅವರ ಅಭಿಪ್ರಾಯ ಹೇಳಿದ್ದಾರೆ. ಅವರು ಕೇಳುವುದರಲ್ಲಿ ತಪ್ಪಿಲ್ಲ. ಅವರ ಬೇಡಿಕೆ ಅವರು ಕೇಳಿದ್ದಾರೆ. ರಾಜ್ಯಸಭೆ, ವಿಧಾನ ಪರಿಷತ್ನಲ್ಲಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಲೋಕಸಭೆಗೂ ಅವರು ಕೇಳಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ತನ್ವೀರ್ ಸೇಠ್, ಎನ್ ಎ ಹ್ಯಾರಿಸ್ ಸೇರಿ ಸುಮಾರು 30ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗಿಯಾಗಿದ್ದರು.