
ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು (ಸೆ.30): ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಬೆಂಗಳೂರು ಬಂದ್ ಮಾಡಿದ್ದ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚರ್ಚೆ ನಡೆಸಿ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ರಾಜ್ಯಕ್ಕೆ ಒಟ್ಟು 106 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ. ನಮಗೆ ಬೆಳೆ ಉಳಿಸಿಕೊಳ್ಳಲು ನೀರಾವರಿಗೆ 70 ಟಿಎಂಸಿ ನೀರು ಅಗತ್ಯವಿದೆ. ಕುಡಿಯಲು 30 ಟಿಎಂಸಿ ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿದಂತೆ ಒಟ್ಟಾರೆ ರಾಜ್ಯಕ್ಕೆ 106 ಟಿಎಂಸಿ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆಯಿದೆ ಎಂದು ವಿವರಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕು ಎಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ತಿಳಿಸಿದರು.

ಪ್ರತಿ ಸಭೆಯಲ್ಲೂ ಪ್ರತಿಭಟಿಸಿದ್ದೇವೆ: ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಅಷ್ಟೇನೂ ಮಳೆ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು ಎಂದು ಹೇಳಿದರು.
