
ಗಾಂಧಿನಗರ: ಗುಜರಾತ್ನಲ್ಲಿ (Gujarat) ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಅತೀವ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.

ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳೀಯ ಆಡಳಿತ ಮಂಡಳಿ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಕಾರ್ಯದಲ್ಲಿ ತೊಡಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಸೋಮವಾರ (ನ.27) ರಂದು ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಗುಜರಾತ್ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (ಎಸ್ಇಒಸಿ) ದತ್ತಾಂಶ ತಿಳಿಸುತ್ತದೆ.
