
ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣಗೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರಂತೆ ಪ್ರಕರಣ ದಾಖಲಾಗಿದೆ.

ಮೈಸೂರು, ಮೇ 3: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal video case) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಪ್ರಜ್ವಲ್ ತಂದೆ, ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ಕೂಡ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೂ (Mysuru) ಹೆಚ್ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ (KR Nagar) ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಹೆಚ್ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಹೆಚ್ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.

ಮಹಿಳೆ ಅಪಹರಣ ಮಾಡಿರುವ ಆರೋಪ
ಹೆಚ್ಡಿ ರೇವಣ್ಣ ವಿರುದ್ಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಪಹರಿಸಿದ ಆರೋಪ ಹೊರಿಸಲಾಗಿದೆ. ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬುವವರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನನ್ನ ತಾಯಿರವರನ್ನು ಹೊಳೆನರಸಿಪುರಕ್ಕೆ ಕರೆದುಕೊಂಡು ಹೋದರು. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು ಕರೆದುಕೊಂಡು ಬಂದು ಬಿಟ್ಟರು. ನನ್ನ ತಂದೆ ಮತ್ತು ತಾಯಿಗೆ, ‘ಪೊಲೀಸ್ ಬಂದರೆ ಏನು ಹೇಳಬೇಡಿ. ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
‘ಬಲವಂತದಿಂದ ಕರೆದೊಯ್ದು ಕೂಡಿಹಾಕಿದ್ದಾರೆ’
ಏಪ್ರಿಲ್ 29ರಂದು 9 ಗಂಟೆಗೆ, ‘ನಿಮ್ಮ ತಾಯಿ ಪೊಲೀಸಿನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ. ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಕರೆದುಕೊಂಡು ಹೋದರು. ಸತೀಶ್ ಅವರ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ 1 ರಂದು ನಮ್ಮ ತಾಯಿ ವಿಡಿಯೋ ಬಗ್ಗೆ ಸ್ನೇಹಿತರ ಬಗ್ಗೆ ನನಗೆ ಮಾಹಿತಿ ಸಿಕ್ಕಿತು. ನಿನ್ನ ಅಮ್ಮ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ. ಆದರೆ ಹಲ್ಲೆ ಪ್ರಕರಣದಲ್ಲಿ ನಿಮ್ಮ ತಾಯಿ ಆರೋಪಿ ಅಂತಾ ಸುಳ್ಳು ಹೇಳಿದರು. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ ಎಂದು ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಬೆಳಕಿಗೆ ಬಂದಿರುವ ಈ ಪ್ರಕರಣ ರಾಜಕೀಯವಾಗಿ ಬಹಳಷ್ಟು ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ. ಈ ಮಧ್ಯ ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ.
ಆದರೆ, ಆರೋಪಿ ಪ್ರಜ್ವಲ್ ಜರ್ಮನಿಯಲ್ಲಿದ್ದು ಭಾರತಕ್ಕೆ ಬರಲು ವಿಳಂಬ ಮಾಡುತ್ತಿದ್ದಾರೆ. ಈ ವಿಚಾರವಾಗಿ ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್ ಗುರುವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಪ್ರಜ್ವಲ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಸಹಕರಿಸದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.