ಮಸೀದಿಯಲ್ಲಿದ್ದ ಕುರ್ ಆನ್ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದರಿಂದ ಮಸ್ಲಿಂ ಸಮುದಾಯದವರು ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಸಿದ್ದಾರೆ.
ಬೆಳಗಾವಿ, (ಮೇ 12): ಮಸೀದಿಯಲ್ಲಿದ್ದ ಕುರಾನ್ (quran )ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ(Belagavi) ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದಿದೆ. ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಲಾಗಿದೆ. ಇಂದು (ಮೇ 12) ಪ್ರಾರ್ಥನೆಗೆಂದು ಬಂದಾಗ ಕುರಾನ್, ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ತಡರಾತ್ರಿ ಮಸೀದಿಯೊಳಗಿನ ಕುರಾನ್ ಕದ್ದು ಕೊಂಡೊಯ್ದಿದ್ದಾರೆ. ಬಳಿಕ ಕುರಾನ್ ಪುಸ್ತಕವನ್ನು ಸುಟ್ಟು ಹಾಕಿದ್ದಾರೆಂಬ ಮಾಹಿತಿ ಇದೆ. ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಸದ್ಯ ಯುವಕರು ಪ್ರತಿಭಟನೆ ಮಾಡಲು ಅವಕಾಶ ಕೇಳಿದ್ದಾರೆ. ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಮನವಿ ಮಾಡಿದ್ದೇವೆ. ಅವರು ಸಾಂಕೇತಿಕವಾಗಿ ವಿಟಿಯು ಬಳಿ ಪ್ರತಿಭಟನೆ ಮಾಡಲಿದ್ದಾರೆ ಎಂದರು.
ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮುಸ್ಲಿಮರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಇನ್ನು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.