

ಬಂಟ್ವಾಳ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿ.ಸಿ.ರೋಡಿನಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುವಾಗ ಆತ ತಪ್ಪಿಸಿಕೊಂಡು ಓಡಲು ಯತ್ನಿಸಿ, ಬಳಿಕ ಆತನನ್ನು ಪೊಲೀಸರು ಸಾರ್ವಜನಿಕರ ಸಹಕಾರದಿಂದ ವಶಕ್ಕೆ ಪಡೆದ ಘಟನೆ ಬುಧವಾರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲುನಲ್ಲಿ ನಡೆದಿದೆ.
ಕಳ್ಳಿಗೆ ಗ್ರಾಮದ ಪೆರಿಯೋಡು ಬೀಡು ಮನೆ ನಿವಾಸಿ ಗಿರೀಶ್ ಯಾನೆ ಗಿರಿಧರ್ತಪ್ಪಿಕೊಂಡು ಓಡಲು ಯತ್ನಿಸಿದ ಆರೋಪಿ. 2003ರಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯಾಗಿರುವ ಗಿರೀಶ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಪೊಲೀಸರು ಬುಧವಾರ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಅದರಂತೆ ಆರೋಪಿಯನ್ನು ಬಸ್ಸಿನಲ್ಲಿ ಕಾರಾಗೃಹಕ್ಕೆ ಕರೆದುಕೊಂಡು ಹೋಗುವ ವೇಳೆ ಬಸ್ಸಿನ ಹೊರಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಬಸ್ಸನ್ನು ನಿಲ್ಲಿಸಿ ಸಾರ್ವಜನಿಕರ ಸಹಕಾರದಿಂದ ಆತನನ್ನು ಬೆನ್ನಟ್ಟಿ ಹಿಡಿದರು.